ಮಂಗಳೂರು: ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು.
ಮಂಗಳೂರಿನ ಎ.ಜೆ.ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪೆನಿಯ ಪ್ರೊಡೆಕ್ಷನ್ ಮ್ಯಾನೇಜರ್ ರೂಭಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾರ್ಡೆ ಮತ್ತು ಸೂಪರ್ವೈಸರ್ ಮಹಮದ್ ಅನ್ವರ್, ಆಜಾದ್ ನಗರ ಪುಳ್ಳಾಲ ಮೂಲದ ವ್ಯಕ್ತಿ ಫಾರೂಕ್ ಎಂಬ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದರು.
ಈ ಸಂಬಂಧ ಐಪಿಸಿ ಸೆಕ್ಷನ್ 304ನ್ನು ದಾಖಲಿಸಲಾಗಿದೆ. ಈ ರೀತಿ ಅಪಾಯಕಾರಿ ಕೆಲಸ ಮಾಡುವಾಗ ಸಾಕಷ್ಟು ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಆದರೆ, ಇಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನೆಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದು ಅತ್ಯಂತ ಗಂಭೀರ ಪ್ರಕರಣವಾಗಿದ್ದು, ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸಿ, ತನಿಖೆ ಮಾಡುತ್ತೇವೆ. ಇದಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಯ ಸಹಕಾರದೊಂದಿಗೆ ತನಿಖೆ ನಡೆಸಿ ಸಾವಿಗೆ ನ್ಯಾಯ ಒದಗಿಸಿಕೊಡುತ್ತೇವೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು.