ಉಡುಪಿ: ರಾಜ್ಯದಲ್ಲಿ ಕೋವಿಡ್-19 ಸೋಂಕು ದಿನೇ ದಿನೇ ಹೆಚ್ಚುತ್ತಿದೆ. ಇದನ್ನು ನಿಯಂತ್ರಿಸಲು ಸರ್ಕಾರ ಜ.5ರಿಂದ 19ರವರೆಗೆ ಹೆಚ್ಚುವರಿ ನಿಯಂತ್ರಣಾ ಕ್ರಮಗಳ ಜಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಡಳಿತ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ. ಹಾಗೂ ಈ ಮಾರ್ಗಸೂಚಿಯನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.
ನೂತನ ಮಾರ್ಗಸೂಚಿಯ ಪ್ರಕಾರ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ ಕೋವಿಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಎಲ್ಲ ಕಚೇರಿಗಳು ವಾರದಲ್ಲಿ 5 ದಿನ ಕೆಲಸ ಮಾಡಬೇಕು. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ.
ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ. ತುರ್ತು ಹಾಗೂ ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶವಿದ್ದು, ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಎಲ್ಲ ಉದ್ಯಾನಗಳನ್ನು ಮುಚ್ಚಲಾಗುವುದು. ಕೈಗಾರಿಕೆಗಳು, ಐಟಿ ಸಂಸ್ಥೆಗಳಿಗೆ ಕೆಲಸ ಮಾಡಲು ಅವಕಾಶವಿದೆ. ಆದರೆ ಇಲ್ಲಿನ ಸಿಬ್ಬಂದಿಗಳು ಗುರುತಿನ ಚೀಟಿಯೊಂದಿಗೆ ಸಂಚರಿಸಬೇಕು.
ರೋಗಿಗಳು ಹಾಗೂ ಪರಿಚಾರಕರು, ಲಸಿಕೆ ತೆಗೆದುಕೊಳ್ಳುವವರು ದಾಖಲೆಗಳ ಜೊತೆಗೆ ಸಂಚಾರ ಮಾಡಬಹುದು. ಆಹಾರ, ದಿನಸಿ, ಹಣ್ಣು, ತರಕಾರಿ, ಮಾಂಸ, ಮೀನು, ಡೈರಿ, ಹಾಲಿನ ಬೂತ್, ಪ್ರಾಣಿಗಳ ಮೇವು ಮಾರಾಟ ಮಾಡುವ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದೆ. ಹೋಂ ಡೆಲಿವರಿ ಸೇವೆಗಳು ಲಭ್ಯವಿದೆ. ಹೋಟೆಲ್ ಹಾಗೂ ರೆಸ್ಟೊರೆಂಟ್ಗಳಲ್ಲಿ ಪಾರ್ಸಲ್ ಕೊಂಡೊಯ್ಯುವ ಅವಕಾಶವಿದೆ. ಬಸ್, ರೈಲು, ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಸಾರ್ವಜನಿಕ ಸಾರಿಗೆ, ಖಾಸಗಿ ವಾಹನ, ಟ್ಯಾಕ್ಸಿಗಳ ಓಡಾಟಕ್ಕೆ ಅನುಮತಿ ನೀಡಿದ್ದು, ಪ್ರಯಾಣಿಕರು ಸೂಕ್ತ ದಾಖಲೆಗಳು ಕಡ್ಡಾಯವಾಗಿ ಹೊಂದಿರಬೇಕು. ಸಭಾಂಗಣದಲ್ಲಿ 100 ಜನ ಮೀರದಂತೆ, ತೆರೆದ ಪ್ರದೇಶಗಳಲ್ಲಿ 200 ಜನ ಮೀರದಂತೆ, ಮದುವೆ ಸಮಾರಂಭ ನಡೆಸಬಹುದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದ್ದಾರೆ.