ಮಂಗಳೂರು: ರಾಜ್ಯದ ಇತರ ಜಿಲ್ಲೆಗಳಲ್ಲಿ ಕೊರೊನಾ ಲಸಿಕೆಯನ್ನು ತೀವ್ರಗೊಳಿಸುವ ಸಲುವಾಗಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೂಡ ಇಂತಹದ್ದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಲಸಿಕೆಯನ್ನು ಪಡೆದುಕೊಳ್ಳಬೇಕು. ಯಾರೂ ಕೂಡ ಇದರಿಂದ ನುಣಿಚಿಕೊಳ್ಳಬಾರದು ಎನ್ನುವ ಕಾರಣಕ್ಕೆ ಮತದಾರರ ಪಟ್ಟಿಯ ಮೂಲಕ ಲಸಿಕೆ ಪಡೆದುಕೊಳ್ಳದವರ ಪತ್ತೆಗೆ ಜಿಲ್ಲಾಡಳಿತ ಮುಂದಾಗಿದೆ.
ಜಿಲ್ಲೆಯಲ್ಲಿ ಲಸಿಕೆ ತೀವ್ರಗೊಳಿಸಲು ಶುಕ್ರವಾರ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿಯವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 17.53ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು ಮತದಾರರ ಪಟ್ಟಿ ಹಿಡಿದು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಕೊರೊನಾ ಲಸಿಕೆಯನ್ನು ಪಡೆಯದವರ ಪತ್ತೆ ಮಾಡಬೇಕು. ಬಳಿಕ ಅವರಿಗೆ ಲಸಿಕೆಯನ್ನು ನೀಡುವ ಜವಾಬ್ದಾರಿಯನ್ನು ಬಿಎಲ್ಒಗಳು ತೆಗೆದುಕೊಳ್ಳಬೇಕು ಎಂದು ಹೇಳಿದರು.
ಬಿಎಲ್ಒಗಳು ಮತದಾರರ ಪಟ್ಟಿ ಹಿಡಿದು ತಮ್ಮ ಬೂತ್ ವ್ಯಾಪ್ತಿಯ ಮನೆ-ಮನೆಗೆ ಭೇಟಿ ನೀಡಿ ಆ ಮನೆಯಲ್ಲಿ 15 ವರ್ಷ ಮೇಲ್ಪಟ್ಟವರಿದ್ದಲ್ಲಿ ಅವರಿಂದ ಲಸಿಕೆಯ ಮಾಹಿತಿಯನ್ನು ಪಡೆಯಬೇಕು. ಅವರು ಲಸಿಕೆಯನ್ನು ಪಡೆದುಕೊಳ್ಳದೇ ಇದ್ದಲ್ಲಿ ಸಂಬಂಧಪಟ್ಟ ವೈದ್ಯಾಧಿಕಾರಿಗಳು, ಪಿಡಿಒ, ಕಂದಾಯ ನಿರೀಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನಿಡುವ ಮೂಲಕ ಲಸಿಕೆಯನ್ನು ಕೊಡುವ ವ್ಯವಸ್ಥೆಯನ್ನು ಮಾಡಬೇಕು ಎಂದು ಸೂಚಿಸಿದರು. ಆ ಮನೆಯಲ್ಲಿ ಅನಾರೋಗ್ಯ ಪೀಡಿತರಿದ್ದರೆ ಅವರು ಲಸಿಕೆ ಪಡೆದ ಬಗ್ಗೆ ಮಾಹಿತಿ ಸಂಗ್ರಹಿಸಿ, ಲಸಿಕೆ ಪಡೆಯದಿದ್ದಲ್ಲಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಲಸಿಕೆಯನ್ನು ಕೊಡಿಸಬೇಕು ಎಂದರು.