ಬೆಂಗಳೂರು: ರಾಜ್ಯದಲ್ಲಿ ಪದವಿ ಕೋರ್ಸ್ ಗಳನ್ನು ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಿರುವ ನಿಯಮವನ್ನು ಇದೀಗ ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಜನವರಿ ೨೧ರ ಸುತ್ತೋಲೆಯಲ್ಲಿ ಈ ಬಗ್ಗೆ ತಿಳಿಸಿರುವ ಸರ್ಕಾರ ಕನ್ನಡ ಭಾಷೆಯನ್ನು ಕಲಿಯಲು ಇಷ್ಟಪಡದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಯುವಂತೆ ಒತ್ತಾಯಿಸುವಂತಿಲ್ಲ ಎಂದು ಸೂಚಿಸಿದೆ.
ಈ ಕುರಿತು ಕರ್ನಾಟಕ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು, ಇದರನ್ವಯ ಈಗಾಗಲೇ ಪದವಿ ಕೋರ್ಸ್ ಗೆ ಸೇರಿರುವ ವಿದ್ಯಾರ್ಥಿಗಳಿಗೆ ಕನ್ನಡ ಬದಲಿಗೆ ತಮ್ಮ ಐಚ್ಛಿಕ ಭಾಷೆಯನ್ನು ಆಯ್ಕೆ ಮಾಡಲು ಅವಕಾಶವಿದೆ ಎಂದು ತಿಳಿಸಲಾಗಿದೆ. ಈ ಬಗ್ಗೆ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಮತ್ತು ರಿಜಿಸ್ಟ್ರಾರ್ಗಳಿಗೆ ಸುತ್ತೋಲೆಯನ್ನು ಕಳುಹಿಸಲಾಗಿದ್ದು, ಈ ಹಿನ್ನಲೆ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರಿಗೂ ಸೂಚನೆಯನ್ನು ನೀಡಲಾಗಿದೆ.
ಆಗಸ್ಟ್ 7, 2021 ರಂದು ರಾಜ್ಯ ಸರ್ಕಾರವು ರಾಜ್ಯದಲ್ಲಿ ಪದವಿ ಕೋರ್ಸ್ ಗಳನ್ನು ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಅನುಗುಣವಾಗಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಲ್ಲದೇ, ಶಾಲೆಯಲ್ಲಿ ಕನ್ನಡ ಕಲಿಯದ ವಿದ್ಯಾರ್ಥಿಗಳು ಒಂದು ಸೆಮಿಸ್ಟಾರ್ಗೆ ಕನ್ನಡ ಅಧ್ಯಯನವನ್ನು ಕಡ್ಡಾಯ ಮಾಡುವಂತೆ ಸರ್ಕಾರ ಸೂಚಿಸಿತ್ತು. ಈ ಬಗ್ಗೆ ಪ್ರಶ್ನಿಸಿ ಕೆಲವು ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಹಿನ್ನೆಲೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ನೀಡಿದ್ದು, ಇದರನ್ವಯ ಹೈಕೋರ್ಟ್ ಮುಂದಿನ ಆದೇಶದವರೆಗೆ ಸ್ಥಳೀಯ ಭಾಷೆಗಳನ್ನು ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಬಾರದು ಎಂದು ರಾಜ್ಯ ಸರ್ಕಾರ ತಿಳಿಸಿದೆ.