ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರುತ್ತಾರೆಂಬ ಗಾಳಿಸುದ್ದಿಗಳು ಕೆಲ ಸಮಯದಿಂದ ಕೇಳಿಬರುತ್ತಿದೆ. ಇದೀಗ ಬಿಜೆಪಿ ಸೇರುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಈ ಬಗ್ಗೆ ಬಿಜೆಪಿ ರಾಜ್ಯ ನಾಯಕರ ಜೊತೆ ಸಂಘ ಪರಿವಾರದ ಪ್ರಮುಖರೊಂದಿಗೆ ಪ್ರಮೋದ್ ಉನ್ನತಮಟ್ಟದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಪ್ರಮೋದ್ ಅವರು ಮೊದಲಿನಷ್ಟು ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ಅವರು ಕಾಂಗ್ರೆಸ್ ಭವನಕ್ಕೆ ಭೇಟಿ ನೀಡುವುದನ್ನು ಕಡಿಮೆ ಮಾಡಿದ್ದು, ಬಿಜೆಪಿ ಮತ್ತು ಬಿಜೆಪಿ ನಾಯಕರ ವಿರುದ್ಧ ಟೀಕೆ ಅಥವಾ ಹೇಳಿಕೆ ನೀಡುತ್ತಿಲ್ಲ ಎನ್ನಲಾಗಿದೆ.
ಇತ್ತೀಚೆಗೆ ಸಂಘ ಪರಿವಾರದ ಹಿರಿಯ ವ್ಯಕ್ತಿಯೊಬ್ಬರ ಜೊತೆ ಬಿಜೆಪಿ ಸೇರುವ ಬಗ್ಗೆ ಪ್ರಮೋದ್ ಸುಧೀರ್ಘ ಚರ್ಚೆ ನಡೆಸಿದ್ದಾರೆ. ಈ ವೇಳೆ ಅವರು ಕಾರ್ಯಕರ್ತರ ನೆಲೆಯಲ್ಲಿ ಪಕ್ಷಕ್ಕೆ ಸೇರಿ, ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಳ್ಳಿ ಎಂದು ಪ್ರಮೋದ್ ಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹಾಗೇ ಪ್ರಮೋದ್ ಅವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ, ಸ್ಥಳೀಯ ಶಾಸಕರೊಂದಿಗೆ ಈ ಕುರಿತು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.