ಬೆಂಗಳೂರು: ಬಂಟರು ಅಂದ್ರೆ ಶ್ರೀಮಂತರಲ್ಲ. ಬಂಟ ಸಮುದಾಯದಲ್ಲೂ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಹೀಗಾಗಿ ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಮನವಿ ಮಾಡಿದರು.
ಅವರು ಬೆಂಗಳೂರು ಬಂಟರ ಸಂಘದ ವತಿಯಿಂದ ಭಾನುವಾರ ನಡೆದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣ ಸ್ವಾಮಿ ಮಾತನಾಡಿ, ಬೆಂಗಳೂರು ಬಂಟರ ಸಂಘದ ಬೇಡಿಕೆಯನ್ನು ಸೂಕ್ತ ರೀತಿಯಲ್ಲಿ ಈಡೇರಿಸುವ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭ ಹಿರಿಯ ರಾಜಕಾರಣಿ ರಮಾನಾಥ್ ರೈ ಅವರಿಗೆ ದಿ.ಡಾ.ಜೀವರಾಜ್ ಆಳ್ವ ಸದ್ಭಾವನಾ ಪ್ರಶಸ್ತಿ, ಉದ್ಯಮಿ ಸರ್ವೋತ್ತಮ ಶೆಟ್ಟಿ ಅವರಿಗೆ ದಿ.ಡಾ.ಡಿ.ಕೆ. ಚೌಟ ಸ್ಮಾರಕ ಸಾಂಸ್ಕೃತಿಕ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರು ಬಂಟರ ಸಂಘದ ವತಿಯಿಂದ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧಾ ವಿಜೇತರಿಗೆ ಕ್ರೀಡಾ ಸಾಧನಾ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಪ್ರಶಸ್ತಿ ನೀಡಲಾಯಿತು.
ಈ ವೇಳೆ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಯ ಅಧ್ಯಕ್ಷ ಕೆ.ಸಿ. ಶೆಟ್ಟಿ, ಮುಂಬೈ ಬಂಟರ ಸಂಘದ ಉಪಾಧ್ಯಕ್ಷ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್.ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಎಮ್. ಮಧುಕರ ಶೆಟ್ಟಿ, ಕ್ರೀಡಾ ಸಮಿತಿಯ ಚೇರ್ ಪರ್ಸನ್ ರಾಧಾಕೃಷ್ಣ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಚೇರ್ ಪರ್ಸನ್ ವಿಜಯ್ ಜೆ. ಶೆಟ್ಟಿ ಹಾಲಾಡಿ ಮತ್ತಿತರರು ಉಪಸ್ಥಿತರಿದ್ದರು