ಉಡುಪಿ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ತಮ್ಮ ಹಳೆಯ ಚಾಳಿ ಆರಂಭಿಸಿ, ವಿವಾದಗಳನ್ನು ಸೃಷ್ಟಿಸಿ ಲಾಭ ಪಡೆಯುವ ಹುನ್ನಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರ ರಾಜಕಾರಣಕ್ಕೆ ತೀಲಾಂಜಲಿ ಇಡುವ ಕಾರ್ಯವನ್ನು ಕಾಂಗ್ರೆಸ್ ಮಾಡಲಿದೆ ಎಂದು ಮಾಜಿ ಶಾಸಕ ಗೋಪಾಲ ಪೂಜಾರಿ ಹೇಳಿದರು.
ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿದ್ಯುತ್, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಶನಿವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ತೈಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮುಚ್ಚಿ ಹಾಕಲು ಬಿಜೆಪಿ ಸರ್ಕಾರವು ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಅವರ ಯೋಚನೆಯ ದಿಕ್ಕನ್ನೇ ತಪ್ಪಿಸುತ್ತಿದೆ. ಈ ಲಜ್ಜೆಗೆಟ್ಟ ಸರ್ಕಾರ ಅನಗತ್ಯ ವಿಚಾರವನ್ನು ಮುನ್ನಲೆಗೆ ತಂದು ನೈಜ ವಿಚಾರವನ್ನು ಮರೆಯುವಂತೆ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಅಮೃತ್ ಶೆಣೈ, ವರೋನಿಕಾ ಕರ್ನೆಲಿಯೋ, ಗೀತಾ ವಾಗ್ಳೆ, ರಮೇಶ್ ಕಾಂಚನ್, ದೀಪಕ್ ಕೋಟ್ಯಾನ್, ರಾಜು ಪೂಜಾರಿ, ಇಸ್ಮಾಯಿಲ್ ಆತ್ರಾಡಿ, ಶಬ್ಬೀರ್ ಉಡುಪಿ, ನಾಸೀರ್, ನವೀನ್ ಡಿಸೋಜ, ಮಂಜುನಾಥ್ ಪೂಜಾರಿ, ಸದಾಶಿವ ದೇವಾಡಿಗ, ಮದನ್ ಕುಮಾರ್, ಹರಿಪ್ರಸಾದ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಸಂತೋಷ್ ಕುಲಾಲ್, ಪ್ರಶಾಂತ್ ಜತ್ತನ್ನ, ಹರೀಶ್ ಕಿಣಿ ಮತ್ತಿತರರು ಭಾಗಿಯಾಗಿದ್ದರು.
ಪ್ರತಿಭಟನೆಗೂ ಮುನ್ನ ಬ್ರಹ್ಮಗಿರಿ ಕಾಂಗ್ರೆಸ್ ಭವನದಿಂದ ಅಜ್ಜರಕಾಡಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.
ಬಂಟ್ವಾಳದಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ:
ಬಂಟ್ವಾಳ: ಕಾಂಗ್ರೆಸ್ ವತಿಯಂದ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯು ಬಂಟ್ವಾಳದ ಬಿ.ಸಿ.ರೋಡಿನ ಫ್ಲೈ ಓವರ್ ಕೆಳಗೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಜನರ ಹಿತ ಕಾಪಾಡುವ ಸರಕಾರ ರಾಜ್ಯದಲ್ಲಿ ಇಲ್ಲ, ನಾವು ಕಂಡಿದ್ದೇವೆ. ಬಹಳಷ್ಟು ಬಡವರಿಗೆ ತೊಂದರೆಯಾಗಿದೆ ಎಂದರು.
ಪ್ರತಿಭಟನೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಎಂ.ಎಸ್.ಮೊಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಅಬ್ಬಾಸ್ ಅಲಿ, ಪದ್ಮನಾಭ ರೈ, ಮಾಯಿಲಪ್ಪ ಸಾಲ್ಯಾನ್, ವಾಸು ಪೂಜಾರಿ, ಜನಾರ್ದನ ಚಂಡ್ತಿಮಾರ್, ಲವೀನಾ ವಿಲ್ಮ ಮತ್ತಿತರರು ಭಾಗಿಯಾಗಿದ್ದರು.