ಮಂಗಳೂರು:ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ದ.ಕ.ಜಿಲ್ಲೆಯ ಹಲವು ಕಡೆಗಳಲ್ಲಿ ಬುಧವಾರ ಸಿಡಿಲು, ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಿದೆ. ಗುರುವಾರವೂ ಕರಾವಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗ್ರಾಮೀಣ ಭಾಗದ ಹಲವು ಕಡೆಗಳಲ್ಲಿ ಮಳೆ ಸುರಿಯಲು ಆರಂಭವಾಗಿದ್ದು, ಆಕಾಶದಲ್ಲಿ ದಟ್ಟ ಮೋಡ ಕವಿದಿತ್ತು. ಮಧ್ಯಾಹ್ನದ ಬಳಿಕ ಮಳೆಯ ಅಬ್ಬರ ತುಸು ಹೆಚ್ಚಾಗಿತ್ತು. ಕೆಲವೆಡೆ 2-3 ಗಂಟೆಗಳ ಕಾಲ ಮಳೆಯಾಗಿದೆ.
ಗಾಳಿಯ ಅಬ್ಬರಕ್ಕೆ ಅಲ್ಲಲ್ಲಿ ಮರದ ಕೊಂಬೆ, ಮರಗಳು ಉರುಳಿದ್ದು, ವಿದ್ಯುತ್ ಕಂಬಗಳು ಬಿದ್ದಿವೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಿ ಜನರು ಸಂಕಷ್ಟ ಅನುಭವಿಸಿದ್ದಾರೆ.
ಉಳ್ಳಾಲ ತಾಲೂಕಿನ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಮಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಇನ್ನು, ಸುಳ್ಯದ ಕಲ್ಮಡ್ಕ, ಹರಿಹರ ಪಳ್ಳತ್ತಡ್ಕ, ದೇವಚ್ಚಳ್ಳ, ಬಾಳಿಲ, ಉಬರಡ್ಕ ಮಿತ್ತೂರು, ಕನಕ ಮಜಲು, ಪುತ್ತೂರಿನ ಬಡಗನ್ನೂರು, ಅರಿಯಡ್ಕ, ಕೊಳ್ತಿಗೆ, ಕೆದಂಬಾಡಿ, ರಾಮಕುಂಜ, ನೆಕ್ಕಿಲಾಡಿ, ಕಡಬದ ಸುಬ್ರಹ್ಮಣ್ಯ ಸುತ್ತಮುತ್ತ, ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಮೂಡುಬಿದಿರೆ ತಾಲೂಕಿನ ವಿವಿಧೆಡೆ ಮಳೆಯಾಗಿದೆ.