ಮಂಗಳೂರು: ರಾಜ್ಯದಲ್ಲಿ ಸರ್ಕಾರ ಇದ್ದು ಇಲ್ಲದಂತಾಗಿದೆ. ಮಹಿಳೆಯರಿಗೆ ಹಾಗೂ ದಲಿತರಿಗೆ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸಂತ್ರಸ್ತರಿಗೆ ರಕ್ಷಣೆ ನೀಡಬೇಕಾದ ಪೊಲೀಸರು ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಆರೋಪಿಸಿದ್ದಾರೆ.
ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಸೋಮವಾರ ನಡೆದ ಅನಿರ್ಧಿಷ್ಟಾವಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಪೊಲೀಸರಿಗೆ ಎಂತೆಂಥ ಆರೋಪಿಗಳನ್ನು ಬಂಧಿಸುವ ಶಕ್ತಿಯಿದೆ. ಆದರೆ ಮಹಿಳೆಯ ಮೇಲೆ ದೌರ್ಜನ್ಯ ವೆಸಗಿದ ಆರೋಪಿಗಳನ್ನು ಬಂಧಿಸುವ ಶಕ್ತಿ ಇಲ್ಲದಂತಾಗಿದೆ. ಪೊಲೀಸರನ್ನು ಶಾಸಕರು ಸಚಿವರು ನಿಯಂತ್ರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಉಜಿರೆಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯವೆಸಗಿದ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ, ಕಾರ್ಮಿಕ ಸಂಘಟನೆ, ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಗಂಗಾಧರ ಗೌಡ, ಮತ್ತು ಕಾರ್ಮಿಕ ಸಂಘಟನೆಯ ಮುಂದಾಳು ಬಿ.ಎಂ.ಭಟ್ ಭಾಗಿಯಾಗಿದ್ದರು.