ಕುಂದಾಪುರ: ಕಳೆದ ಒಂದು ತಿಂಗಳಿನಿಂದ ಡೆಂಘಿ ಪೀಡಿತರಿಗೆ ಬೇಕಾದ ಅಗತ್ಯ ವ್ಯವಸ್ಥೆಗಳನ್ನು ಗ್ರಾಮಪಂಚಾಯತ್ ಹಾಗೂ ಸ್ಥಳೀಯ ಸಹಕಾರಿ ಸಂಘಗಳ ಮೂಲಕ ಮಾಡುತ್ತಿದ್ದು, ಕ್ಷಣಕ್ಷಣಕ್ಕೂ ಮಾಹಿತಿ ಪಡೆದು ಅಧಿಕಾರಿಗಳ ಜೊತೆ ಸಂಪರ್ಕ ಮಾಡುತ್ತಿದ್ದೇನೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದ್ದಾರೆ.
ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ, ಡೆಂಘಿ ಪೀಡಿತರ ಯೋಗಕ್ಷೇಮ ವಿಚಾರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಮುದೂರಿಗೆ ಆಗಮಿಸಲಿದ್ದಾರೆ. ಮುದೂರು ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು, ರಬ್ಬರ್ ಟ್ಯಾಪಿಂಗ್ ಮಾಡುವ ಚಿಪ್ಪಿನಲ್ಲಿ ಮಳೆ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿ ಡೇಂಗಿ ಹಬ್ಬಿದೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಜೊತೆ ಸಂಪರ್ಕದಲ್ಲಿದ್ದು ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.
ಇನ್ನು ಇತ್ತೀಚೆಗೆ ಸರ್ಕಾರದ ಆಡಳಿತಕ್ಕೆ ಒಳಪಟ್ಟ ಉಡುಪಿಯಲ್ಲಿನ ಬಿ.ಆರ್. ಶೆಟ್ಟಿ ಆಸ್ಪತ್ರೆಗೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ 22 ಆರೋಗ್ಯ ಇಲಾಖಾ ಸಿಬ್ಬಂದಿಗಳನ್ನು ವರ್ಗಾವಣೆ ಮಾಡುವ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ನನ್ನ ವಿರೋಧವಿದೆ. ಇಂದು ಸಂಜೆ ನಡೆಯುವ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡುವೆ. ನಿನ್ನೆಯೇ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಹಿತ ಆರೋಗ್ಯ ಸಚಿವ ಡಾ. ಸುಧಾಕರ್ ಅವರ ಬಳಿ ಮಾತನಾಡಿದ್ದೇನೆ. ಕುಂದಾಪುರ ಆಸ್ಪತ್ರೆಯ ನರ್ಸ್ ಯಾರನ್ನೂ ವರ್ಗಾವಣೆ ಮಾಡಬಾರದು, ನಮ್ಮಲ್ಲಿ ಬೆಡ್ ಇಲ್ಲ, ನಿರ್ವಹಣೆ ಮಾಡಲು ಜನರಿಲ್ಲ ಎಂಬ ವಿಚಾರ ತಿಳಿಸಿದ್ದೇನೆ ಎಂದರು.