Saturday, June 7, 2025

ನೈಟ್‌ಕರ್ಫ್ಯೂ ಮತ್ತು ಹೊಸ ವರ್ಷಾಚರಣೆ ಗೆ ಜಿಲ್ಲೆಯಲ್ಲಿ ಕಠಿಣ ಕ್ರಮ

ಉಡುಪಿ: ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಪತ್ರಿಕಾಗೋಷ್ಠಿ ನಡೆಸಿದರು. ಓಮಿಕ್ರಾನ್ ನಿಯಂತ್ರಣ ಮಾಡಲು ನೈಟ್‌ಕರ್ಫ್ಯೂ ಹಾಗೂ ಹೊಸ ವರ್ಷಾಚರಣೆ ಕುರಿತ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಇದನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಆನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

ಡಿಸೆಂಬರ್ 28 ರಿಂದ ಜನವರಿ 7 ರ ವರಗೆ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್‌ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಈ ಮಧ್ಯೆ ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ವೈದ್ಯಕೀಯ ಮತ್ತು ತುರ್ತು ಸೇವೆಗಳು, ರಾತ್ರಿಯಲ್ಲಿ ಕಾರ್ಯನಿರ್ವಹಿಸುವ ಕೈಗಾರಿಕೆ, ಕಂಪೆನಿಗಳಿಗೆ ಅನುಮತಿ ನೀಡಲಾಗಿದೆ. ಆದರೆ ರಾತ್ರಿ ಕೆಲಸ ನಿರ್ವಹಿಸುವ ನೌಕರರು ಸೂಕ್ತ ಗುರುತಿನ ಚೀಟಿ ಹೊಂದಿರಬೇಕು. ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು, ಪ್ರಯಾಣಿಕರು ಪ್ರಯಾಣದ ಸೂಕ್ತ ದಾಖಲೆಗಳು ಸಲ್ಲಿಸುವುದು ಕಡ್ಡಾಯವಾಗಿದೆ. ಎಲ್ಲಾ ರೀತಿಯ ಸರಕು ಸಾಗಾಟ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಹಾಗೂ ಇ-ಕಾಮರ್ಸ್ ಮತ್ತು ಹೋಮ್ ಡೆಲಿವರಿ ಕೆಲಸಗಳು ಎಂದಿನಂತೆ ಮುಂದುವರೆಸಲು ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.
ಡಿಸೆಂಬರ್ 30 ರಿಂದ ಜನವರಿ 2 ರ ವರೆಗೆ ಹೊಸ ವರ್ಷಾಚರಣೆ ಅಂಗವಾಗಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ರೆಸ್ಟೋರೆಂಟ್, ಕ್ಲಬ್, ಪಬ್, ಹೋಟೆಲ್‌ಗಳು, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ ಹೀಗೆ ಮುಂತಾದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅನುಮತಿ ಇಲ್ಲ. ರಸ್ತೆಗಳು, ಉದ್ಯಾನವನಗಳು, ಆಟದ ಮೈದಾನಗಳು ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಹೊಸವರ್ಷವನ್ನು ಆಚರಿಸುವಂತಿಲ್ಲ. ಹಾಗೂ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಕ್ಲಬ್‌ಗಳು, ಪಬ್‌ಗಳು ಶೇಕಡ 50 ರಷ್ಟು ಆಸನಗಳೊಂದಿಗೆ ಕಾರ್ಯನಿರ್ವಹಿಸಬೇಕು. ಕೋವಿಡ್-19 ರ ಎಲ್ಲಾ ನಿಯಮಗಳನ್ನು ಪಾಲಿಸಬೇಕು. ಸಿಬ್ಬಂದಿಗಳು ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ಮತ್ತು 2 ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಇಲ್ಲಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವ ಕುರಿತು ಪತ್ರವನ್ನು ಹೊಂದಿರುವುದರ ಜೊತೆಗೆ ಈ ಪತ್ರವನ್ನು ಪ್ರದರ್ಶಿಸಿದ ನಂತರವೇ ಅವರಿಗೆ ಪ್ರವೇಶ ನೀಡಬೇಕು ಎಂದರು.
ಡಿಸೆಂಬರ್ 28 ರಿಂದ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಸಭೆ, ಸಮಾರಂಭ, ಸಮ್ಮೇಳನ, ಮದುವೆ ಇತ್ಯಾದಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಸಂಖ್ಯೆ 300 ದಾಟಬಾರದು, ಈ ಕಾರ್ಯಕ್ರಮಗಳಲ್ಲಿ ಎಲ್ಲರೂ ಕೋವಿಡ್-19 ರ ಎಲ್ಲಾ ನಿಯಮಗಳನ್ನು ಪಾಲಿಸುವಂತೆ ನೋಡಿಕೊಳ್ಳುವುದು ಸಂಘಟಕರ ಹಾಗೂ ವ್ಯವಸ್ಥಾಪಕರ ಜವಾಬ್ದಾರಿಯಾಗಿದೆ ಎಂದರು.
ಇಲ್ಲಿಯವರೆಗೆ 96.03% ಜನರಿಗೆ ಪ್ರಥಮ ಡೋಸ್ ಹಾಗೂ 82.97% ಜನರಿಗೆ ಎರಡನೇ ಡೋಸ್ ಕೋವಿಡ್-19 ಲಸಿಕೆಯನ್ನು ಜಿಲ್ಲೆಯಲ್ಲಿ ನೀಡಲಾಗಿದೆ. ಕೇಂದ್ರ ಮತ್ತು ರಾಜ್ಯದ ಮಾರ್ಗಸೂಚಿ ಬಂದ ನಂತರ 15-18 ವರ್ಷ ವಯಸ್ಸಿನವರಿಗೆ ಹಾಗೂ ಬೂಸ್ಟರ್ ಡೋಸ್ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ಜಿಲ್ಲೆಯಲ್ಲಿ 55 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ 0.2% ಇದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles