ನವದೆಹಲಿ:ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಹಿಂದುಳಿದ ವರ್ಗದ (ಒಬಿಸಿ) ಮೀಸಲಾತಿ ಬದಲು ಆರ್ಥಿಕ ಹಿಂದುಳಿದ ವರ್ಗದ ಮೀಸಲಾತಿ ನೀಡಿದ್ದ ಕರ್ನಾಟಕ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಮೊದಲಿನ ವ್ಯವಸ್ಥೆಯನ್ನೇ ಯಥಾಸ್ಥಿತಿಯಲ್ಲಿ ಕಾಯ್ದಿಡುವಂತೆ ಮತ್ತೊಮ್ಮೆ ಆದೇಶಿಸಿದೆ. ರಾಜ್ಯ ಸರ್ಕಾರದಿಂದ ರದ್ದುಗೊಳಿಸಲಾಗಿದ್ದ ಮುಸ್ಲಿಂ ಸಮುದಾಯದ ಒಬಿಸಿ ಮೀಸಲಾತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಆದೇಶಕ್ಕೆ ಏ.25ರಂದು ತಡೆ ನೀಡಿತ್ತು. ಮತ್ತೆ ಮಂಗಳವಾರ (ಮೇ 9) ಪ್ರಕರಣವನ್ನು ನ್ಯಾ.ಕೆ.ಎಂ.ಜೋಸೆಫ್ ನೇತೃತ್ವದ ಪೀಠದಲ್ಲಿ ವಿಚಾರಣೆ ಮಾಡಲಾಗಿದ್ದು, ಈ ಹಿಂದಿನ ಆದೇಶವನ್ನು ಮುಂದುವರೆಸುವ ಹಾಗೂ ಮೀಸಲಾತಿ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಲಾಗಿದೆ.
ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಸಂವಿಧಾನಾತ್ಮಕ ಪೀಠದಲ್ಲಿ ಪ್ರಕರಣದ ವಿಚಾರಣೆ ಇದೆ ಹಾಗಾಗಿ ಮುಂದೂಡುವಂತೆ ಮನವಿ ಮಾಡಿದರು. ಅಲ್ಲದೇ ಸರ್ಕಾರ ತನ್ನ ಹಿಂದಿನ ಹೇಳಿಕೆ ಗೆ ಬದ್ದವಾಗಿರುತ್ತದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ ಮುಸ್ಲಿಂ ಮೀಸಲಾತಿ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಪೀಠ ಆದೇಶ ಹೊರಡಿಸಿದೆ. ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಿದೆ.