ಮಂಗಳೂರು: ಹಿಜಾಬ್ ಧರಿಸಿ ಬಂದಿದ್ದ ಹತ್ತಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕಾಲೇಜಿನ ಒಳಗಿನ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದ ಹಿನ್ನಲೆಯಲ್ಲಿ ಕಾಲೇಜಿಗೆ ರಜೆ ಘೋಷಿಸಿದ ಘಟನೆ ಇಂದು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
ಹಿಜಾಬ್ ಧರಿಸಿ ಬಂದಿದ್ದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ಕೋರ್ಟ್ ಆದೇಶ ಪಾಲಿಸುವಂತೆ ಸೂಚಿಸಿದ್ದರೂ ವಿದ್ಯಾರ್ಥಿನಿಯರು ಮಾತ್ರ ಹಿಜಾಬ್ ತೆಗೆಯುವುದಿಲ್ಲವೆಂದು ಈ ವೇಳೆ ಪಟ್ಟು ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನೊಳಗಿದ್ದ ಇತರೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರ ವಿರುದ್ಧ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಕಾಲೇಜಿನ ಒಳಗಿದ್ದ ವಿದ್ಯಾರ್ಥಿಗಳ ನಡುವೆ ಹಾಗೂ ಇವರೊಂದಿಗೆ ಪರಸ್ಪರ ವಾಗ್ದಾಳಿ ನಡೆಸಿ ಜಟಾಪಟಿ ನಡೆದಿದೆ. ಘಟನೆ ವಿಕೋಪಕ್ಕೆ ಹೋಗುವ ಮುನ್ನ ಮುನ್ನೆಚ್ಚರಿಕೆಯಿಂದ ಆಡಳಿತ ಮಂಡಳಿ ಕಾಲೇಜಿಗೆ ರಜೆ ಘೋಷಿಸಿ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ಘಟನೆ ನಡೆದಿದೆ.