ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಬುಧವಾರ ಸಂಜೆ ಧಾರ್ಮಿಕ ಸಭೆ ನಡೆಯಿತು.
ಸುಮಾರು 50 ವರ್ಷಗಳ ಹಿಂದೆ ತೀರಾ ಶಿಥಿಲಾವಸ್ಥೆ ಮತ್ತು ಕೇವಲ ಕುರುಹು ಮಾತ್ರ ಪತ್ತೆಯಾದ ಸಾಕಷ್ಟು ಕ್ಷೇತ್ರಗಳು ಜಿಲ್ಲೆಯಲ್ಲಿ ಜೀರ್ಣೋದ್ಧಾರವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದರು.
ಭಾರತ ದೇಶವು ದೇವರ ಭೂಮಿ ಎಂದು ಗುರುತಿಸಲ್ಪಟ್ಟಿದೆ. ದೇವರ ಆರಾಧನೆಗೆ ಭಕ್ತಿ ಹಾಗೂ ಪ್ರೀತಿ ಅಗತ್ಯವೆಂದು ಸುಬ್ರಹ್ಮಣ್ಯ ಮಠಾಧೀಶ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯರು ಧಾರ್ಮಿಕ ಉಪನ್ಯಾಸ ನೀಡಿದರು. ಕಾರ್ಯದರ್ಶಿ ನಾಗರಾಜ್ ಭಟ್ ಪ್ರಾಸ್ತಾವಿಕ ಮಾತನಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ, ಉದ್ಯಮಿ ಬಿ.ರಘುನಾಥ ಸೋಮಯಾಜಿ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಗ್ರಾ.ಪಂ. ಅಧ್ಯಕ್ಷ ಪ್ರಕಾಶ ಆಳ್ವ, ಪ್ರಮುಖರಾದ ದೇವಪ್ಪ ಪೂಜಾರಿ, ಸುದೀಪ್ ಕುಮಾರ್ ಶೆಟ್ಟಿ, ಕೊಡ್ಮಾಣ್ ಕಾಂತಪ್ಪ ಶೆಟ್ಟಿ, ಕ್ಷೇತ್ರದ ತಂತ್ರಿ ಸುಬ್ರಹ್ಮಣ್ಯ ತಂತ್ರಿ ಪೊಳಲಿ, ಧರ್ಮಸ್ಥಳ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ ಶೆಟ್ಟಿ, ಆಡಳಿತ ಮೊಕ್ತೇಸರ ವಿಷ್ಣುಮೂರ್ತಿ ಭಟ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಸಮಿತಿ ಗೌರವಾಧ್ಯಕ್ಷ ಭಾಸ್ಕರ ರಾವ್ ಪಲ್ಲಿಪಾಡಿ ಸ್ವಾಗತಿಸಿ, ಉಪಾಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ ವಂದಿಸಿದರು. ಸತ್ಯನಾರಾಯಣ ಭಟ್ ಮತ್ತು ರಮೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ರಾಜು ಕೋಟ್ಯಾನ್ ಸಹಕರಿಸಿದರು.