ಮೂಡುಬಿದಿರೆ: ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಇಲ್ಲಿ ಎಲ್ಲರಿಗೂ ಮಾತನಾಡುವ, ಪ್ರತಿಭಟಿಸುವ ಅಭಿವ್ಯಕ್ತ ಸ್ವಾತಂತ್ರ್ಯವಿದೆ. ಆದರೆ ನಮ್ಮನ್ನಾಳುವ ಸರ್ಕಾರ ಕಾರ್ಮಿಕ ವರ್ಗಕ್ಕೆ ಸಿಗುವ ಸವಲತ್ತು ಹಾಗೂ ಕಾನೂನನ್ನು ತಿದ್ದುಪಡಿ ಮಾಡುವ ಮೂಲಕ ದುಡಿಯುವ ವರ್ಗಕ್ಕೆ ದ್ರೋಹ ಮಾಡುತ್ತಿದ್ದಾರೆ ಎಂದು ಸಿ.ಐ.ಟಿ.ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಕಾರ್ಮಿಕರ ಸಂಘಟನೆಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆಯುತ್ತಿರುವ ಅಖಿಲ ಭಾರತ ಸಾರ್ವತ್ರಿಕ ಮಹಾ ಮುಷ್ಕರದ ಅಂಗವಾಗಿ ಮೂಡುಬಿದಿರೆ ತಾಲೂಕು ಕಚೇರಿ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಇಡೀ ಕಾನೂನನ್ನು ಸರ್ಕಾರ ಬಂಡವಾಳ ಶಾಹಿಗಳ ಪರವಾಗಿ ತಿದ್ದುಪಡಿ ಮಾಡುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಹಮಾಲಿ ನೌಕರರು, ಬಸ್ನಲ್ಲಿ ದುಡಿಯುವ ದಿನಗೂಲಿ ನೌಕರರು ಅತೀ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದು ಈ ಸಂಬಳವನ್ನು ಆಡಳಿತ ಮಾಡುವ ಸರ್ಕಾರದವರು ಪಡೆದು ತೋರಿಸಲಿ. ಜಾಗತೀಕರಣ, ಉದಾರೀಕರಣ ನೀತಿಗಳಿಂದಾಗಿ 21ನೇ ಅಖಿಲ ಭಾರತ ಮಹಾ ಮುಷ್ಕರ ನಿರಂತರವಾಗಿ ನಡೆಯುತ್ತಿದ್ದು, ಇದು ಎಚ್ಚರಿಕೆಯ ಗಂಟೆಯಾಗಿದೆ ಎಂದರು.
ನಂತರ ನೌಕರರ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಮೂಡುಬಿದಿರೆ ತಹಶೀಲ್ದಾರ್ ಪುಟ್ಟರಾಜು ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಕರ್ನಾಟಕ ಪ್ರಾಂತ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಯಾಧವ ಶೆಟ್ಟಿ, ಬಿಸಿಯೂಟ ನೌಕರರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರಿಜ, ಮೂಡುಬಿದಿರೆ ವಲಯ ಸಿಐಟಿಯುನ ಅಧ್ಯಕ್ಷೆ ರಮಣಿ, ಕಾರ್ಯದರ್ಶಿ ರಾಧ, ಉಪಾಧ್ಯಕ್ಷ ಶಂಕರ ವಾಲ್ಪಾಡಿ, ಜೊತೆ ಕಾರ್ಯದರ್ಶಿ ಲಕ್ಷ್ಮೀ , ದಲಿತ ಸಂಘದ ಕೃಷ್ಣಪ್ಪ ಕೋಣಾಜೆ, ಕಮಿಟಿ ಸದಸ್ಯರಾದ ಕೃಷ್ಣಪ್ಪ, ಜಯಾನಂದ ಪೂಜಾರಿ ಮಾರೂರು ಉಪಸ್ಥಿತರಿದ್ದರು.