ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಬೆಳಗ್ಗೆ ಭಯೋತ್ಪಾದಕರು ನಡೆಸಿದ ಬಾಂಬ್ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಾಜೌರಿ ಸೆಕ್ಟರ್ನ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಮಂಗಳವಾರ ಜಮ್ಮು ಪ್ರದೇಶದ ಭಟ ಧುರಿಯನ್ನ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್ಗೆ ಹೊಂಚುದಾಳಿ ನಡೆಸಿದ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಮತ್ತು ನಿರ್ಮೂಲನೆ ಮಾಡಲು ಗುಪ್ತಚರ ಆಧಾರಿತ ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.ಕಾಂಡಿ ಅರಣ್ಯದ ದಟ್ಟವಾದ ಸಸ್ಯಗಳು ಮತ್ತು ಕಲ್ಲಿನ ಭೂಪ್ರದೇಶದ ಗುಹೆಯಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಆಧರಿಸಿ, ಗುರುವಾರ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಶುಕ್ರವಾರ ಬೆಳಿಗ್ಗೆ 7:30 ರ ಸುಮಾರಿಗೆ ಶೋಧ ತಂಡವು ಭಯೋತ್ಪಾದಕರ ಸಂಪರ್ಕಕ್ಕೆ ಬಂದಿದ್ದು, ಗುಂಡಿನ ಚಕಮಕಿ ನಡೆಯಿತು. ನಂತರ ಭಯೋತ್ಪಾದಕರು ತಪ್ಪಿಸಿಕೊಳ್ಳಲು ಸ್ಫೋಟಕ ಸಾಧನವನ್ನು ಸಿಡಿಸಿದ್ದಾರೆ.ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಮತ್ತು ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ.