ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯಾ ರಾವ್ ಅನ್ನು ಈ ಹಿಂದೆ ಬಂಧಿಸಲಾಗಿತ್ತು. ಇದೀಗ ಆರೋಪಿಗೆ ಮಂಗಳೂರಿನ 4ನೇ ಜಿಲ್ಲಾ ನ್ಯಾಯಾಲಯವು ಬುಧವಾರ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಆರೋಪಿ ಆದಿತ್ಯಾ ರಾವ್ಗೆ ಪ್ರತ್ಯೇಕ ಎರಡು ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿದೆ. ಸ್ಫೋಟಕ ವಸ್ತು ತಡೆ ಕಾಯ್ದೆ ಅಡಿ 5ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಅಡಿ 20ವರ್ಷ ಶಿಕ್ಷೆ ವಿಧಿಸಲಾಗಿದೆ. ಈ ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗುತ್ತದೆ.
ಆರೋಪಿ ಆದಿತ್ಯಾ ರಾವ್ 2020ರ ಜ.20ರಂದು ಮಂಗಳೂರು ವಿಮಾನ ನಿಲ್ದಾಣದ ಒಳಗೆ ಬಾಂಬ್ ಇಟ್ಟು ಪರಾರಿಯಾಗಿದ್ದ. ಇದಾದ ಎರಡು ದಿನಗಳ ಬಳಿಕ ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ.
ಮೂಲತಃ ಉಡುಪಿಯ ಮಣಿಪಾಲದವನಾದ ಆದಿತ್ಯ ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರನಾಗಿದ್ದನು. 2018ರಲ್ಲಿ ಬೆಂಗಳೂರು ವಿಮಾನ ನಿಲ್ದಾಣ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ ಈತನ ಅರ್ಜಿ ಸೂಕ್ತ ದಾಖಲೆಗಳಿಲ್ಲದೆ ಅರ್ಜಿ ತಿರಸ್ಕೃತಗೊಂಡಿತ್ತು. ಇದರಿಂದ ಆಕ್ರೋಶಗೊಂಡ ಆದಿತ್ಯಾ ಅನೇಕ ಬಾರಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದನು. ಬಳಿಕ ಆದಿತ್ಯಾ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದನು.