ಉಡುಪಿ: ಪ್ರತಿನಿತ್ಯ ಉಡುಪಿ ಹಾಗೂ ಮಲ್ಪೆ ಬೀಚ್ಗೆ ಹೊರ ರಾಜ್ಯ, ಜಿಲ್ಲೆಗಳಿಂದ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ಅವರಿಗೆ ಭದ್ರತೆ, ಸಲಹೆ-ಸೂಚನೆ ನೀಡುವಲ್ಲಿ ಮಲ್ಪೆ ಬೀಚ್ಅನ್ನು ನಿರ್ವಹಣೆಗಾಗಿ ಗುತ್ತಿಗೆ ಪಡೆದಿರುವ ಟೆಂಡರ್ದಾರರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್ ಆರೋಪಿಸಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಸಿಗರಿಗೆ ಲೈಫ್ ಜಾಕೇಟ್ ಕೊಡಬೇಕು, ಸೂಕ್ತ ಸಲಹೆ ಸೂಚನೆ ನೀಡಬೇಕೆಂಬ ಇತ್ಯಾದಿ ನಿಯಮಗಳನ್ನು ಬೀಚ್ ಅಭಿವೃದ್ಧಿ ಸಮಿತಿ ರೂಪಿಸಿದೆ. ಆದರೆ ಬೀಚ್ ಅಭಿವೃದ್ಧಿ ಸಮಿತಿಯ ಕಾನೂನುಗಳನ್ನು ಟೆಂಡರ್ದಾರರು ಗಾಳಿಗೆ ತೂರಿ, ತಮ್ಮ ಇಚ್ಛೆಗೆ ಅನುಸಾರವಾಗಿ ವರ್ತಿಸುತ್ತಿದ್ದಾರೆ. ಇದನ್ನು ಒಂದು ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ದೂರಿದರು.
ಟೆಂಡರ್ದಾರರ ನಿರ್ಲಕ್ಷ್ಯದಿಂದ ಗುರುವಾರ ಮೂರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಹಿಂದೆಯೂ ಹಲವು ವಿದ್ಯಾರ್ಥಿಗಳು ನೀರುಪಾಲಾಗಿದ್ದು, ಇದಕ್ಕೆ ಗುತ್ತಿಗೆದಾರರೇ ನೇರ ಹೊಣೆ. ಅವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಬೀಚ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರವಾಸಿಗರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ಮಲ್ಪೆ ಬೀಚ್ಗೆ ಬರುವ ಪ್ರವಾಸಿಗರಿಗೆ ಭದ್ರತೆ ನೀಡುವಲ್ಲಿ ಗುತ್ತಿಗೆದಾರರು ವಿಫಲ; ರಮೇಶ್ ಕಾಂಚನ್ ಆರೋಪ
Subscribe
Login
0 Comments