Tuesday, June 24, 2025

ಪ್ರತಿಯೊಂದು ಮಗುವು ಹುಟ್ಟುತ್ತಲೇ ವಿಶ್ವ ಮಾನವವಾಗಿರುತ್ತದೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದ್ದು, ನಿತ್ಯ ಸತ್ಯವಾಗಿದೆ. ಪ್ರತಿಯೊಂದು ಮಗುವು ಹುಟ್ಟುತ್ತಲೇ ವಿಶ್ವ ಮಾನವವಾಗಿರುತ್ತದೆ. ಬೆಳೆಯುತ್ತಾ ಹೋದಂತೆ ಜಾತಿ, ಅಂತಸ್ತು ಮುಂತಾದ ಭೇಧ-ಭಾವಗಳ ಮೂಲಕ ಅವನನ್ನು ನಾವು ಅಲ್ಪ ಮಾನವನನ್ನಾಗಿ ಮಾಡುತ್ತೇವೆ. ಅವನನ್ನು ವಿಶ್ವ ಮಾನವನನ್ನಾಗಿಯೇ ಇರಲು ಬಿಡಬೇಕು ಎಂಬುದು ಕುವೆಂಪು ಅವರ ವಿಶ್ವ ಮಾನವ ಸಂದೇಶ. ಯಾವುದೇ ಭೇಧ-ಭಾವ ತೋರದೇ ಪ್ರತಿಯೊಬ್ಬರಿಗೂ ಶಿಕ್ಷಣವನ್ನು ನೀಡುವ ಮೂಲಕ ವಿದ್ಯೆಯಿಂದ ಅಲ್ಪ ಮಾನವನನ್ನು ವಿಶ್ವ
ಮಾನವರನ್ನಾಗಿ ಮಾಡಲು ಸಾಧ್ಯವಿದೆ. ಕುವೆಂಪು ಅವರ ಜೀವನ ಮತ್ತು ಸಂದೇಶ ಎಲ್ಲರಿಗೂ ಸದಾ ದಾರಿ ದೀಪವಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಕುವೆಂಪು ಕುರಿತು ವಿಶೇಷ ಉಪನ್ಯಾಸ ನೀಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಅವರು ಮಾತನಾಡಿ, ಕುವೆಂಪು ಅವರು 20 ನೇ ಶತಮಾನದ ದೈತ್ಯ ಪ್ರತಿಭೆ. ಕುವೆಂಪು ಕುರಿತು ಕಿರು ಪುಸ್ತಕಗಳನ್ನು ಮುದ್ರಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ
ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ವಿತರಿಸುವ ಯೋಜನೆಯಿದೆ. ಕುವೆಂಪು ಶತಮಾನೋತ್ಸವ ಶಾಲೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು. ಕುವೆಂಪು ಅವರ ದಿನಚರಿ ನೆನಪಿನ ದೋಣಿಯಲ್ಲಿ ಕೃತಿಯನ್ನು ಪ್ರತಿಯೊಬ್ಬರೂ ಓದುವ ಮೂಲಕ ಅವರ ಜೀವನವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಗಾಯಕಿ ಕಲಾವತಿ ದಯಾನಂದ್ ಅವರಿಂದ ಕುವೆಂಪು ಅವರ ಗೀತ ಗಾಯನ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ವಂದಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest


0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles