ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನವಾದ ಘಟನೆ ಕಾಪು ಮಲ್ಲಾರು ಸಲಫಿ ಮಸೀದಿ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ರಜಾಕ್ ಮಲ್ಲಾರ್ ಎಂದು ಗುರುತಿಸಲಾಗಿದ್ದು, ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂಗಡಿಗೆ ಗುಜರಿಗೆಂದು ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದೆ. ಸ್ಫೋಟದಿಂದ ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುಜರಿ ಅಂಗಡಿಯಲ್ಲಿದ್ದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತು ನಾಶವಾಗಿದೆ.
ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಎರಡು ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆಸಿದೆ.