ಕುಂದಾಪುರ: ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ಸರ್ಕಾರಿ ಬಸ್ ಅಗತ್ಯವಿದೆ. ಆದರೆ ಹಳ್ಳಿಗಳಿಗೆ ಸರ್ಕಾರಿ ಬಸ್ ಬಿಡಲು ಅಧಿಕಾರಿಗಳು ಮೀನಾಮೇಷ ಮಾಡುತ್ತಿದ್ದಾರೆ. ಹಳ್ಳಿಗಳಿಗೆ ಸರಿಯಾಗಿ ಸರ್ಕಾರಿ ಬಸ್ ಓಡಿಸ್ರೀ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಕುಂದಾಪುರದ ಬಗ್ವಾಡಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಕಲೆಕ್ಷನ್ ಬಗ್ಗೆ ಚಿಂತಿಸದೆ ಜನರಿಗೆ, ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು. ವ್ಯವಸ್ಥೆ ಸರಿಪಡಿದೇ ಹೋದಲ್ಲಿ 5000ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಡಿಪೋಗೆ ಮುತ್ತಿಗೆ ಹಾಕಿಸುತ್ತೇನೆ. ಮೊದಲು ಸಮಸ್ಯೆ ಬಗೆಹರಿಸಿ, ಇಲ್ಲವಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಎದುರಿಸಿ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಆಗಬಾರದು. ಇದರಲ್ಲಿ ನನ್ನ ವೈಯಕ್ತಿಕ ಲಾಭವಿಲ್ಲ, ವಿದ್ಯಾರ್ಥಿಗಳ ವಿದ್ಯಾರ್ಜನೆ ಅಗತ್ಯ ಎಂದು ಅಧಿಕಾರಿಗಳ ಕರ್ತವ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.