ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಮನೋಹರ್ ಕಲ್ಮಾಡಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಜಿಲ್ಲಾಧಿಕಾರಿ ಕೂರ್ಮರಾವ್, ಶಾಸಕ ಕೆ.ರಘುಪತಿ ಭಟ್, ಮಾಜಿ ಅಧ್ಯಕ್ಷ ರಾಘವೇಂದ್ರ ಕಿಣಿ ಅವರ ಉಪಸ್ಥಿತಿಯಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು.
ಈ ಹಿಂದೆ ಅಧ್ಯಕ್ಷರಾಗಿದ್ದ ರಾಘವೇಂದ್ರ ಕಿಣಿ ಅವರು ತನ್ನ ಸ್ಥಾನಕ್ಕೆ ಕಳೆದ ತಿಂಗಳು ರಾಜೀನಾಮೆ ನೀಡಿದ್ದರು. ಸರ್ಕಾರವು ಅವರ ಸ್ಥಾನಕ್ಕೆ ಮನೋಹರ್ ಕಲ್ಮಾಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಇಂದು ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಯಾವುದೇ ಅವ್ಯವಹಾರ ಆಗದ ರೀತಿಯಲ್ಲಿ ಸ್ವಚ್ಛವಾದ ಆಡಳಿತ ನೀಡಬೇಕು. ನಗರಾಭಿವೃದ್ಧಿಯ ಕಾರ್ಯವೈಖರಿಯನ್ನು ಹೆಚ್ಚಿಸುವಂತಾಗಬೇಕು ಎಂದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಮನೋಹರ್ ಕಲ್ಮಾಡಿ, ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗದ ರೀತಿ ಕೆಲಸ ಮಾಡುತ್ತೇನೆ. ಬಾಕಿ ಇರುವ ಕಡತ ವಿಲೇವಾರಿ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುತ್ತೇನೆ ಎಂದರು.
ಪ್ರವೀಣ್ ಕುಮಾರ್ ಶೆಟ್ಟಿ, ಕಿಶೋರ್ ಕುಮಾರ್, ಸುಮ ನಾಯಕ್, ಮಾಲತಿ ಸುಧಾಕರ್, ಯೋಗೀಶ್ ಚಂದ್ರ ಅವರನ್ನು ನೂತನ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಯಶ್ಪಾಲ್ ಸುವರ್ಣ ಮತ್ತಿತರು ಉಪಸ್ಥಿತರಿದ್ದರು.