ಮೂಡುಬಿದಿರೆ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಸಚಿವ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಅವರ ಮೇಲೆ ದೇಶ ದ್ರೋಹದ ಕೇಸ್ ದಾಖಲಿಸುವಂತೆ ಆಗ್ರಹಿಸಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ, ಈಶ್ವರಪ್ಪ ಅವರ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಇಳಿಸಿ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂಬ ಹೇಳಿಕೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತೆ. ಬಿಜೆಪಿಯವರು ಏರಿಸುವ ಕೇಸರಿ ಧ್ವಜವನ್ನು ಇಳಿಸಿ ನಾವು ರಾಷ್ಟ್ರಧ್ವಜವನ್ನು ಹಾರಿಸಿ, ನಮ್ಮ ರಾಷ್ಟ್ರಪ್ರೇಮವನ್ನು ತೋರಿಸುವುದು ಖಂಡಿತ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಅವರ ವಿರುದ್ಧ ಕೇಸು ದಾಖಲಿಸಿ ಗಡಿಪಾರು ಮಾಡಬೇಕು. ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸದಿದ್ದರೆ, ದೇಶದ್ರೋಹದ ಕೇಸನ್ನು ದಾಖಲಿಸಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ತಹಶೀಲ್ದಾರ್ ಪುಟ್ಟರಾಜು ಅವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಯುವ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಕೊರಗಪ್ಪ, ಜೊಸ್ಸಿ ಮಿನೇಜಸ್, ಸುರೇಶ್ ಪ್ರಭು, ಪುರಂದರ ದೇವಾಡಿಗ, ಹಿಮಾಯುತ್ತಲ್, ಇಕ್ಬಾಲ್ ಕರೀಂ, ಪುತ್ತಿಗೆ ಗ್ರಾ.ಪಂ.ಅಧ್ಯಕ್ಷ ಪ್ರವೀಣ್ ಶೆಟ್ಟಿ, ಸದಸ್ಯರಾದ ಮುರಳೀಧರ ಕೋಟ್ಯಾನ್, ಪುರುಷೋತ್ತಮ ನಾಯಕ್, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್, ಪುರಸಭಾ ಮಾಜಿ ಅಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಕಾಂಗ್ರೆಸ್ ಮುಖಂಡರಾದ ರಾಜೇಶ್ ಕಡಲಕೆರೆ, ನಿತಿನ್ ಬೆಳುವಾಯಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.