ವಿಶ್ವ ಆರೋಗ್ಯ ಸಂಸ್ಥೆ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಅವರು ಆರೋಗ್ಯವಂತ ಮಕ್ಕಳು ಹಾಗೂ ಹದಿಹರೆಯದವರಿಗೆ ಕೊರೋನಾ ಸೋಂಕಿನ ವಿರುದ್ಧ ಬೂಸ್ಟರ್ ಡೋಸ್ ಅಗತ್ಯವಿದೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ತಿಳಿಸಿದ್ದಾರೆ. ಲಸಿಕೆಗಳ ಪರಿಣಾಮವು ಶೀಘ್ರವಾಗಿ ಹರಡುತ್ತಿರುವ ಒಮಿಕ್ರಾನ್ ವಿರುದ್ಧ ಕಾಲಾನಂತರದಲ್ಲಿ ಕ್ಷೀಣಿಸುತ್ತದೆ. ಯಾರಿಗೆಲ್ಲ ಬೂಸ್ಟರ್ ಡೋಸ್ ಅಗತ್ಯವಿದೆ ಎಂಬುದನ್ನು ಖಾತರಿ ಪಡಿಸಿಕೊಳ್ಳಲು ಹೆಚ್ಚಿನ ಸಂಶೋಧನೆಯ ಅಗತ್ಯವಿದೆ ಎಂದು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕೊರೋನಾದ ಪ್ರತಿ ಹೊಸ ರೂಪಾಂತರಕ್ಕೆ ಹೊಸ ಲಸಿಕೆಯನ್ನು ಮಾಡುವ ಅಗತ್ಯವಿಲ್ಲ. ಬದಲಿಗೆ ನಾವು ಕೊರೋನಾ ಹಾಗೂ ಅದರ ರೂಪಾಂತರಿಗಳ ವಿರುದ್ಧ ರಕ್ಷಣಾತ್ಮಕ ಲಸಿಕೆಗಳಿಗಾಗಿ ಸಂಶೋಧನೆ ಹಾಗೂ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡಬೇಕು. ಜಗತ್ತಿನಾದ್ಯಂತ ನಡೆಯುತ್ತಿರುವ ಎಲ್ಲಾ ಲಸಿಕೆ ಪರಿಣಾಮದ ಬಗೆಗಿನ ಅಧ್ಯಯನವನ್ನು ವಿಶ್ವ ಆರೋಗ್ಯ ಸಂಸ್ಥೆಯು ಟ್ರ್ಯಾಕ್ ಮಾಡುತ್ತಿದೆ. ಲಸಿಕೆಗಳು ತೀವ್ರವಾದ ಅನಾರೋಗ್ಯ, ಆಸ್ಪತ್ರೆಗೆ ದಾಖಲಾಗುವುದನ್ನು ಮತ್ತು ಸಾವಿನ ಪ್ರಮಾಣ ಕಡಿಮೆ ಮಾಡಿ ಜನರನ್ನು ರಕ್ಷಣೆ ಮಾಡುತ್ತಿದೆ ಎಂದು ಸೌಮ್ಯ ಸ್ವಾಮಿನಾಥನ್ ಹೇಳಿದರು.