ಉಡುಪಿ: ಜಿಲ್ಲೆಯ ಆದಿ ಉಡುಪಿಯ ಅಂಬೇಡ್ಕರ್ ಭವನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು, ಟೆಕ್ನಿಕಲ್ ಕನ್ಸಲ್ಟೆನ್ಸಿಸರ್ವಿಸಸ್ ಆರ್ಗನೈಸೇಷನ್ ಆಫ್ ಕರ್ನಾಟಕ, ಪ.ಜಾತಿ, ಪ.ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು, ಪರಿಶಿಷ್ಟ ಜಾತಿ ವರ್ಗಗಳ ಕೈಗಾರಿಕೋದ್ಯಮಗಳ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯಮ ಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೈಗಾರಿಕ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಡಿ. ಬಾಳೇರಿ ಅವರು ಯುವ ಜನರು ಸ್ವ-ಉದ್ಯೋಗ ಮಾಡುವುದರಿಂದ ಆರ್ಥಿಕವಾಗಿ ಸಬಲರಾಗುವುದರ ಜೊತೆಗೆ ಸ್ವಾವಲಂಬಿಗಳಾಗಬಹುದು. ಸರ್ಕಾರವು ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಯುವಜನರಿಗೆ ಉದ್ಯೋಗ ಒದಗಿಸಿ ನಿರುದ್ಯೋಗ ನಿವಾರಣೆ ಮಾಡಲು ಹಮ್ಮಿಕೊಂಡಿದೆ. ಇದನ್ನು ಯುವಜನತೆ ಸದ್ಭಳಕೆ ಮಾಡಿಕೊಳ್ಳಬೇಕು. ಉದ್ಯಮ ಮಾಡುವುದರ ಜೊತೆಗೆ ಆರ್ಥಿಕವಾಗಿ ಸಬಲರಾಗಿ ದೇಶದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.
ಸಹಾಯಕ ನಿರ್ದೇಶಕ ವಾಮನ ನಾಯ್ಕ ಅವರು ಮಾತನಾಡಿ ಸ್ವಯಂ ಉದ್ಯೋಗಗಳನ್ನು ಮಾಡಲು ಯುವಜನರು ಕೌಶಲ್ಯ ಚಟುವಟಿಕೆಯನ್ನು ಮೈಗೂಡಿಸಿಕೊಂಡು, ತಮ್ಮ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು. ರಾಷ್ಟ್ರೀಕೃತ ಬ್ಯಾಂಕುಗಳು ಸ್ವ-ಉದ್ಯೋಗ ಮಾಡಲು ಆರ್ಥಿಕ ಸಹಕಾರ ನೀಡುವುದರ ಜೊತೆಗೆ ಕೆಲವೊಂದು ಮಾರ್ಗದರ್ಶನಗಳನ್ನು ನೀಡುತ್ತದೆ. ಇದರ ಉಪಯೋಗವನ್ನು ಯುವಜನತೆ ಪಡೆದುಕೊಳ್ಳಬೇಕು ಎಂದರು.
ನಂತರ ಪೂರ್ಣಪ್ರಜ್ಞ ಕಾಲೇಜಿನ ಜೈ ಕಿಶನ್ ಭಟ್ ಉಪನ್ಯಾಸ ನೀಡಿದರು. ಇವರು ಯುವಜನತೆಯು ಹೊಸ ವಿಚಾರಗಳ ಕುರಿತು ಅವಲೋಕಿಸಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸಿಕ್ಕ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಸಮಾಜಕ್ಕೆ ಮಾದರಿ ವ್ಯಕ್ತಿಯಾಗಬೇಕು ಎಂದರು.
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಮಂಗಳೂರು ಇದರ ಅಧ್ಯಕ್ಷರಾದ ಮೋಹನಾಂಗಯ್ಯ ಸ್ವಾಮಿ ಹತ್ತು ದಿನಗಳ ಉದ್ಯಮ ಶೀಲತಾ ಅಭಿವೃದ್ಧಿ ಕಾರ್ಯಕ್ರಮದ ಧ್ಯೇಯೋದ್ದೇಶಗಳನ್ನು ಹಾಗೂ ಯಶಸ್ವಿ ಉದ್ಯಮಶೀಲರ ಯಶೋಗಾಥೆಯನ್ನು ಒಳಗೊಂಡ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ, ವರ್ಗಗಳ ಕೈಗಾರಿಕೋದ್ಯಮಗಳ ಸಂಘದ ಜಿಲ್ಲಾ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಸ್ವಾಗತಿಸಿ, ವಂದಿಸಿದರು.